ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ  ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.

Last Updated : Nov 2, 2019, 04:18 PM IST
ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ   title=
file photo

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ  ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ನೂರು ದಿನಗಳನ್ನು ಒಂದು ಅದ್ಭುತ ವಿಡಿಯೋ ಪ್ರಸಾರದ ಮೂಲಕ ಆಚರಿಸಿದ್ದಾರೆ. ಈ ಮೂಲಕ ತಾವು ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ರಾಜ್ಯದ ಜನ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ ಬಿಎಸ್ವೈ ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹ ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ?  ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ‌ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ ಅಮಿತ್ ಶಾ ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು.'ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಮ್ ಕೋರ್ಟ್‌ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ' ಎಂದು ತಿಳಿಸಿದರು.

ನಮ್ಮ‌ ಪಕ್ಷದ ವತಿಯಿಂದ ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ' ಎಂದು ಹೇಳಿದರು.     

 

 

Trending News