ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವ ಸಿಎಂ ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಸಿಎಂ ಸಿದ್ದರಮಯ್ಯ, ಕೊಟ್ಯಂತರ ರೂ.ಗಳ ಅವ್ಯವಹಾರ ನಡೆದಿರುವ 'ಆಪರೇಷನ್ ಕಮಲ' ವಿಚಾರದ ಬಗ್ಗೆಯೂ ಸಿಬಿಐ ತನಿಖೆಗೆ ಆದೇಶಿಸಲಿ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿ ಬಿಎಸ್ವೈ ನಿರ್ಧಾರ ಸ್ವಾಗತಾರ್ಹ. ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಯಡಿಯೂರಪ್ಪನವರು ಹೇಳಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ" ಎಂದಿದ್ದಾರೆ.



ಮುಂದುವರೆದು, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ  ಇದ್ದ ಬಿಜೆಪಿ, ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ. ಆದರೆ, ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.



ಭಾನುವಾರ ಬೆಳಿಗ್ಗೆಯಷ್ಟೇ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದರು.