ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿಂದು ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟ ಆಯೋಜಿಸಲಾಗಿತ್ತು. ರಾಜಕೀಯ ಕಾರಣಗಳಿಂದಾಗಿ ಈ ಉಪಹಾರ ಕೂಟ ಭಾರೀ ಕುತೂಹಲ ಮೂಡಿಸಿದೆ.
ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವ ಡಿ.ಕೆ.ಶಿವಕುಮಾರ್ ಅವರ ಸರ್ಕಾರಿ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಸಚಿವರಿಗೆ ಆಯೋಜಿಸಲಾಗಿದ್ದ ಈ ಉಪಾಹಾರ ಕೂಟದಲ್ಲಿ ರಾಜಕೀಯದ ಬಿಸಿ ಬಿಸಿ ಚರ್ಚೆ ಕೂಡ ನಡೆದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ಈ ಉಪಹಾರ ಕೂಟದಲ್ಲಿ ಗೈರಾಗಿದ್ದಿದ್ದು ಎದ್ದು ಕಾಣುತ್ತಿತ್ತು. ಸಿದ್ದರಾಮಯ್ಯ ಅವರ ಆಪ್ತರಾದ ಜಮೀರ್, ಜಯಮಾಲಾ, ಯು.ಟಿ.ಖಾದರ್ ಸೇರಿದಂತೆ ಹಲವರು ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದಾರೆ. ಡಿ.ಕೆ.ಸುರೇಶ್, ಕೆಪಿಸಿಸಿ ಉಪಾಧ್ಯಕರೂ ಸಹ ಕೂಟದಲ್ಲಿ ಪಾಲ್ಗೊಂಡಿದ್ದಾರೆ. 13 ಸಚಿವರು ಕೂಟದಲ್ಲಿ ಪಾಲ್ಗೊಂಡಿದ್ದರು.
ಇನ್ನು ಉಪಹಾರ ಕೂಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಈ ಉಪಹಾರ ಕೂಟವನ್ನು ಸಿದ್ದರಾಮಯ್ಯನವರ ಸಲಹೆಯಂತೆ ಮಾಡಿದ್ದೇವೆ. ಅವರನ್ನು ಯಾವಾಗ ಕರೆಯಬೇಕು ಆವಾಗ ಕರೆಯುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.