ಬೆಂಗಳೂರು: ಗುತ್ತಿಗೆದಾರನೊಬ್ಬ ಸಚಿವ ಈಶ್ವರಪ್ಪ ವಿರುದ್ಧ ೪೦ ಪರ್ಸೆಂಟ್‌ ಕಮೀಷನ್‌ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಗಾಗಿ ಕೂಡಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೋಳಿಸಬೇಕು. ಹಾಗೇ ಅವರ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಿ ಬಂಧಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ


ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೆ ಕಮೀಷನ್ ನೀಡಿ ರಸ್ತೆ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು. ಆದರೆ ಈಶ್ವರಪ್ಪ ಅವರು ಹೆಚ್ಚು ಕಮೀಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ, ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್‌ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದರು. 


"ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಸರ್ಕಾರ ಈಶ್ವರಪ್ಪ ಅವರ ವಿರುದ್ಧ ಸೆಕ್ಷನ್ 302ರಡಿ ಕೇಸ್ ದಾಖಲಿಸಬೇಕು ಮತ್ತು ತಕ್ಷಣ ಈಶ್ವರಪ್ಪ ಅವರನ್ನು ಬಂಧಿಸಬೇಕು. ಈ ಕೂಡಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಕೊಲೆ ಆರೋಪ ಎದುರಿಸುತ್ತಿರುವ ಈಶ್ವರಪ್ಪ ಅವರು ಸಚಿವ ಸಂಪುಟದಲ್ಲಿ ಮುಂದುವರೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಕಾಶ ನೀಡಬಾರದು. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಬಹುದು. ಆದ್ದರಿಂದ ಇದೊಂದು ಗಂಭೀರ ಪ್ರಕರಣವಾಗಿದೆ. ಸಂತೋಷ್ ಪಾಟೀಲ್ ಸಾವಿಗೆ ಈಶ್ವರಪ್ಪ ಅವರೇ ಕಾರಣ" ಎಂದರು.  


ಇದೊಂದು ಭ್ರಷ್ಟಾಚಾರ ಪ್ರಕರಣವೂ ಆಗಿದೆ. ಸಂತೋಷ್ ಪಾಟೀಲ್ ಅವರು ಈಗಾಗಲೇ ಈಶ್ವರಪ್ಪ ಅವರಿಗೆ ಕಮೀಷನ್ ನೀಡಿದ್ದರು. ಗುತ್ತಿಗೆ ಕಾಮಗಾರಿಯ ಬಾಕಿ ಅನುದಾನ ಬಿಡುಗಡೆ ಮಾಡಲು ಸಚಿವರು ಹೆಚ್ಚಿನ ಕಮೀಷನ್‌ಗೆ ಬೇಡಿಕೆ ಇಟ್ಟಿದ್ದಾರೆ. ಆತನಿಗೆ ಈ ಹಣ ಹೊಂದಿಸಲು ಸಾಧ್ಯವಾಗದ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದರು. 


ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಕ್ಕೂ, ಇದಕ್ಕೂ ಸಂಬಂಧವಿಲ್ಲ. ಆತ್ಮಹತ್ಯೆಗೆ ಶರಣಾಗುವ ಮುನ್ನ ಆತ ಈಶ್ವರಪ್ಪ ಅವರೇ ನನ್ನ ಸಾವಿಗೆ ನೇರ ಕಾರಣ ಎಂದು ಆರೋಪ ಮಾಡಿರುವುದರಿಂದ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ಈಗ ಈಶ್ವರಪ್ಪ ಅವರು ಏನು ಪ್ರತಿಕ್ರಿಯೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಾಡಿರುವ ಆರೋಪ ಮುಖ್ಯ. ಹಾಗಾಗಿ ಈಶ್ವರಪ್ಪ ಅವರ ಮೇಲೆ ಸೆಕ್ಷನ್ 302ರಡಿ ಕೊಲೆ ಪ್ರಕರಣ ದಾಖಲಿಸಿ, ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. 


ಇದನ್ನು ಓದಿ: ಆಸ್ಟ್ರೇಲಿಯಾ-ದಕ್ಷಿಣ ಭಾರತ ನಡುವೆ ಮೊದಲ ನೇರ ಮಾರ್ಗಗಳಿಗೆ ಚಾಲನೆ: ಇಂಡಿಗೊ ಜೊತೆ ಸಹಯೋಗ


ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಬೇಕು. ಸಂಪುಟದಿಂದ ವಜಾಗೊಳಿಸಿ ಅವರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು. ಇವ್ಯಾವುದನ್ನು ಅವರು ಮಾಡಿಲ್ಲ. ಈ ಬಗ್ಗೆ ನಾವು ಧ್ವನಿ ಎತ್ತುತ್ತೇವೆ. ಈಶ್ವರಪ್ಪ ಹೇಳಿಕೆಗೆ ನಾವು ಮಹತ್ವ ನೀಡಲ್ಲ, ಅವರೊಬ್ಬ ಕೊಲೆ ಆರೋಪ ಹೊತ್ತಿರುವ ವ್ಯಕ್ತಿ. ಅವರು ಎಷ್ಟು ದೊಡ್ಡ ಭ್ರಷ್ಟ ಎಂದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ..