ಬೆಂಗಳೂರು: ರಾಜ್ಯದಲ್ಲಿನ ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದರು.  


COMMERCIAL BREAK
SCROLL TO CONTINUE READING

ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ ಸಿಎಂ ಕುಮಾರಸ್ವಾಮಿ, ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ 33 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದ್ದು, ನಷ್ಟವಾದ ಸಾಮರ್ಥ್ಯವನ್ನು ಮರುಭರಿಸಲು ಫ್ಲಡ್ ಫ್ಲೋ ಕೆನಾಲ್ (flood flow canal) ಮೂಲಕ ನೀರನ್ನು ನವಲಿ ಗ್ರಾಮದ ಹತ್ತಿರ ಸಮತೋಲನಾ ಜಲಾಶಯವನ್ನು ನಿರ್ಮಿಸಿ ನೀರನ್ನು ಶೇಖರಿಸಿ ಬಳಸಲು ಯೋಜಿಸಲಾಗಿದೆ. ಹೂಳು ತೆಗೆಯುವ ಕಾರ್ಯಕ್ಕೆ ಆದ್ಯತೆ ನೀಡಿ ಈ ಸಂಬಂಧ ಕಾರ್ಯಕ್ರಮ ರೂಪಿಸುವಂತೆ ಸೂಚಿಸಿದರು. 


ಮಹಾದಾಯಿ ನೀರನ್ನು ಬಳಸಿಕೊಳ್ಳಲು ಮಹಾದಾಯಿ ನ್ಯಾಯಾಧೀಕರಣದ ವ್ಯಾಪ್ತಿಯಲ್ಲಿ ಬರುವ ಕಾನೂನಿನ ತೊಡಕುಗಳನ್ನು ನಿವಾರಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದ ಅವರು, ರಾಜ್ಯದಲ್ಲಿ ಎಲ್ಲ ನೀರಾವರಿ ಯೋಜನೆಗಳಿಂದ ಒಟ್ಟು  66.66 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ . ಇನ್ನೂ 11.46 ಲಕ್ಷ ಹೆಕ್ಟೇರ್  ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬೇಕಿದೆ ಎಂದರು.


ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ. 
ಮೇಕೆದಾಟು ಯೋಜನೆಯು ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಬೆಂಗಳೂರು ನಗರಕ್ಕೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ತಿಳಿಸಿದರು.


ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು , ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲಭಾಗಗಳಲ್ಲಿ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮುಂಗಾರಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡುವ ಕಾರ್ಯಕ್ಕೆ ವೇಗ ನೀಡಬೇಕು. ಅಧಿಕಾರಿಗಳು ಅಂದಾಜು ವೆಚ್ಚ ತಯಾರಿಸುವ ಸಂದರ್ಭದಲ್ಲಿ ನೀರಿನ ಸದ್ಬಳಕೆಗೆ ಒತ್ತು ನೀಡಬೇಕೆಂದು ತಿಳಿಸಿದರು.
 
ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ ಭಾಗದ ರೈತರಿಗೆ ಅನುಕೂಲವಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕೃಷಿ ಬಳಕೆಗೆ ನೀರು ಯೋಗ್ಯವಾಗಿದ್ದು, ನೀರಿನ ಪುನರ್ಬಳಕೆಯ ಇಂತಹ ಯೋಜನೆಗಳಿಗೆ ಆದ್ಯತೆ ನೀಡಬೇಕು. 


ರಾಜ್ಯದ ಅಭಿವೃದ್ಧಿಗೆ ಪ್ರಮುಖ ಅಂಗವಾಗಿರುವ ಜಲಸಂಪನ್ಮೂಲ ಇಲಾಖೆ ಎರಡು ಆಯವ್ಯಯದಲ್ಲಿ ಒಟ್ಟಾರೆ 37 ಸಾವಿರ ಕೋಟಿ ರೂಗಳನ್ನು ಹಂಚಿಕೆ ಮಾಡಲಾಗಿದೆ. ಈ ಅನುದಾನದ ಸದ್ಬಳಕೆ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 


ನಿರಂತರ ಬರ ಹಾಗೂ ಮಳೆಯ ಕೊರತೆಯಿಂದ ನೀರಿನ ಪ್ರಮಾಣ ಕುಸಿತ:
ನಿರಂತರ ಬರ ಹಾಗೂ ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹಂತ ಹಂತವಾಗಿ ಕುಸಿಯುತ್ತಿದೆ. ಇದೇ ಸಮಯದಲ್ಲಿ ಕುಡಿಯುವ ನೀರಿಗೆ ಬೇಡಿಕೆಯೂ ಹೆಚ್ಚಾಗಿದೆ. ಪ್ರತಿ ಗ್ರಾಮ ಮತ್ತು ನಗರಕ್ಕೆ ಕುಡಿಯುವ ನೀರು ಹಾಗೂ ಕೃಷಿಗೆ ನೀರನ್ನು ಒದಗಿಸುವುದು ಪ್ರಥಮ ಆದ್ಯತೆ ಆಗಬೇಕು. ಕುಡಿಯುವ ನೀರು ಹೊರತುಪಡಿಸಿ, ಉಳಿದ ನೀರನ್ನು ದುರ್ಬಳಕೆ ಮಾಡದೆ ಕಡಿಮೆ ನೀರು ಬಳಸಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ತಿಳುವಳಿಕೆ ಮೂಡಿಸಬೇಕಿದೆ ಎಂದು ಅವರು ಹೇಳಿದರು. 


ಉಪಮುಖ್ಯಮಂತ್ರಿ ಡಾ|| ಜಿ,ಪರಮೇಶ್ವರ್ ಮಾತನಾಡಿ, ನಮ್ಮ ನೀರಾವರಿ ಸಾಮರ್ಥ್ಯವನ್ನು ತಲುಪಲು ನೀಲನಕ್ಷೆಯನ್ನು  ರೂಪಿಸಬೇಕು . ಗುರಿ ಮುಟ್ಟಲು ಕಾರ್ಯನಿರತರಾಗಬೇಕು. ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿ ದೂರದೃಷ್ಟಿ ಇರಬೇಕು. ಜಲಸಂಪನ್ಮೂಲ  ಇಲಾಖೆಯ ಅಧೀನದಲ್ಲಿ ಬರುವ ಪ್ರತಿ ನಿಗಮದ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಬೇಕೆಂದು ಸಲಹೆ ನೀಡಿದ ಅವರು, ಕೃಷಿಯಿಂದ ಉದ್ಯೋಗ ಸೃಜನೆ ಹಾಗೂ ಕೃಷಿ ಉತ್ಪನ್ನಗಳ ವೃದ್ಧಿಯಾಗಿ, ರಾಜ್ಯದ ಆರ್ಥಿಕ ಶಕ್ತಿ ಹೆಚ್ಚಾಗುತ್ತದೆ ಎಂದರು.
 
ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಜಲಸಂಪನ್ಮೂಲ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗೋಪಾಲಸ್ವಾಮಿ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಮಣ್ಯಂ ಹಾಜರಿದ್ದರು.