)
ಬೆಂಗಳೂರು: ಕೇಂದ್ರ ಸರ್ಕಾರದ ಜಿಎಸ್ಟಿ ಸರಳೀಕರಣ ನಿರ್ಧಾರದಿಂದ ಕರ್ನಾಟಕಕ್ಕೆ ವಾರ್ಷಿಕವಾಗಿ ಸುಮಾರು 15,000 ಕೋಟಿ ರೂಪಾಯಿಗಳ ಆರ್ಥಿಕ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಿಹಾರ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿರುವ ಅವರು, ಜಿಎಸ್ಟಿ ಉತ್ಸವ ಆಚರಣೆಯ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.“2017ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ಟಿಯನ್ನು ಜಾರಿಗೆ ತಂದು ದರ ನಿಗದಿಪಡಿಸಿತು. ಎಂಟು ವರ್ಷಗಳಿಂದ ಜನರಿಂದ ಹೆಚ್ಚಿನ ತೆರಿಗೆ ಸಂಗ್ರಹಿಸಿದ ಕೇಂದ್ರ, ಈಗ ದರ ಕಡಿಮೆ ಮಾಡಿ ತನ್ನ ಬೆನ್ನು ತಾನೇ ತಟ್ಟಿಕೊಳ್ಳುತ್ತಿದೆ. ಈ ಹಣವನ್ನು ಜನರಿಗೆ ಮರಳಿ ನೀಡುವರೇ?” ಎಂದು ಸಿಎಂ ಪ್ರಶ್ನಿಸಿದ್ದಾರೆ.
ಕರ್ನಾಟಕವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂಪಾಯಿಗಳ ತೆರಿಗೆಯನ್ನು ನೀಡಿದರೂ, ರಾಜ್ಯಕ್ಕೆ ಕೇವಲ 14 ಪೈಸೆ ಪ್ರತಿ ರೂಪಾಯಿಗೆ ಮರಳಿ ಬರುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಕೇವಲ 3,200 ಕೋಟಿ ರೂ. ತೆರಿಗೆ ಹಂಚಿಕೆಯಾಗಿದ್ದು, ಉತ್ತರ ಪ್ರದೇಶಕ್ಕೆ ಶೇ.18ರಷ್ಟು ನೀಡಲಾಗುತ್ತಿದ್ದರೆ, ಕರ್ನಾಟಕಕ್ಕೆ ಕೇವಲ ಶೇ.3.5ರಷ್ಟು ಮಾತ್ರ ದೊರೆಯುತ್ತಿದೆ. “ಇದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ,” ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ.
ಜಿಎಸ್ಟಿ ಉತ್ಸವ ಆಚರಿಸುವ ಅಗತ್ಯ ಏನಿದೆ? 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ಟಿಯನ್ನು ಜಾರಿಗೆ ತಂದು, ದರ ನಿಗದಿಪಡಿಸಿತು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ… pic.twitter.com/ib7iT5wD1b
— Siddaramaiah (@siddaramaiah) October 3, 2025
15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕಕ್ಕೆ ನೀಡಬೇಕಿದ್ದ 5,490 ಕೋಟಿ ರೂ. ವಿಶೇಷ ಅನುದಾನ, ಕೆರೆಗಳ ಅಭಿವೃದ್ಧಿಗೆ 3,000 ಕೋಟಿ, ರಸ್ತೆ ನಿರ್ಮಾಣಕ್ಕೆ 3,000 ಕೋಟಿ, ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ಸೇರಿದಂತೆ ಒಟ್ಟು 17,000 ಕೋಟಿ ರೂ. ಅನುದಾನವನ್ನು ಕೇಂದ್ರ ವಿತ್ತ ಸಚಿವರು ರದ್ದುಪಡಿಸಿದ್ದಾರೆ ಎಂದು ಸಿಎಂ ದೂರಿದ್ದಾರೆ. “ಅಗತ್ಯಬಿದ್ದರೆ ನ್ಯಾಯಾಲಯದ ಮೊರೆ ಹೋಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಪಡೆಯುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ಕಡಿಮೆ ಅನುದಾನದ ನಡುವೆಯೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ದಿಟ್ಟತನದಿಂದ ಎದುರಿಸುತ್ತಿದೆ. ಆದರೆ, ಜಿಎಸ್ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳಿಗೆ ಭಾರೀ ನಷ್ಟವಾಗಲಿದ್ದು, ಕರ್ನಾಟಕಕ್ಕೆ ವಾರ್ಷಿಕ 15,000 ಕೋಟಿ ರೂ. ನಷ್ಟವಾಗಲಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಎನ್ಡಿಎ ಆಡಳಿತದ ರಾಜ್ಯಗಳಿಗೆ ಜಿಎಸ್ಟಿ ಪರಿಹಾರವನ್ನು ಅನುಕೂಲಕರವಾಗಿ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಸಿಎಂ, ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತಕ್ಕಿಂತ ಪ್ರಧಾನಿ ಮೋದಿಯವರನ್ನು ಹೊಗಳುವ ಕೆಲಸದಲ್ಲೇ ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.