ಸಿಲಿಕಾನ್ ಸಿಟಿಯಲ್ಲಿ 5 ವರ್ಷ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಅವಕಾಶ ನೀಡದಿರಲು ಚಿಂತನೆ!

ನೀರಿನ ಅಭಾವದಿಂದ ಅಪಾರ್ಟ್‌ಮೆಂಟ್‌ನಲ್ಲಿರುವ ಬಹುತೇಕರು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿಕೊಂಡು, ಚರ್ಮರೋಗದಂಥ ಸಮಸ್ಯೆಗೆ ತುತ್ತಾಗಿದ್ದಾರೆ.

Last Updated : Jun 27, 2019, 01:26 PM IST
ಸಿಲಿಕಾನ್ ಸಿಟಿಯಲ್ಲಿ 5 ವರ್ಷ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಅವಕಾಶ ನೀಡದಿರಲು ಚಿಂತನೆ! title=
Pic Courtesy: DNA

ಬೆಂಗಳೂರು:  ಅಪಾರ್ಟ್‌ಮೆಂಟ್‌ಗಳಲ್ಲಿ ಕುಡಿಯುವ ನೀರಿನಂಥ ಮೂಲಸೌಕರ್ಯ ಒದಗಿಸಿಕೊಡದೇ ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡುತ್ತಿರುವುದರಿಂದ 5 ವರ್ಷಗಳ ಕಾಲ ಅಪಾರ್ಟ್ಮೆಂಟ್‌‌ ನಿರ್ಮಾಣಕ್ಕೆ ಅವಕಾಶ ನೀಡದೇ ಇರಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಾಕಷ್ಟು ಅಪಾರ್ಟ್‌ಮೆಂಟ್‌ ಕಟ್ಟಲಾಗಿದೆ. ಆದರೆ, ಮಾರಾಟ ಮಾಡುವ ವೇಳೆ ಕುಡಿಯುವ ನೀರಿನಂಥ ಮೂಲಸೌಕರ್ಯ ಒದಗಿಸಿಕೊಡುವ ಭರವಸೆ ನೀಡುವುದಿಲ್ಲ. 

ನೀರಿನ ಅಭಾವದಿಂದ ಅಪಾರ್ಟ್‌ಮೆಂಟ್‌ನಲ್ಲಿರುವ ಬಹುತೇಕರು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿಕೊಂಡು, ಚರ್ಮರೋಗದಂಥ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಅವಕಾಶ ನೀಡದೇ ಇರಲು ಚಿಂತಿಸಲಾಗಿದೆ. ಈ ಸಂಬಂಧ ಎಲ್ಲಾ ಡೆವಲಪರ್ಸ್‌ರ ಸಭೆ ನಡೆಸಿ, ಅವರ ಅಭಿಪ್ರಾಯವನ್ನು ಪಡೆದು, ಬಳಿಕ ತೀರ್ಮಾನ ಮಾಡಲಾಗುವುದು. ಐದು ವರ್ಷದ ಬಳಿಕ ನಗರಕ್ಕೆ ವಿವಿಧ ಮೂಲಗಳಿಂದ ನೀರು ಸರಬರಾಜು ಆಗಲಿದ್ದು, ಈ ಸಮಸ್ಯೆ‌ ನೀಗಲಿದೆ ಎಂದರು. 

ಪ್ರಸ್ತುತ, ಇರುವ ಅಪಾರ್ಟ್‌ಮೆಂಟ್‌ನಲ್ಲಿ ಎಸ್‌ಟಿಪಿ ಅಳವಡಿಕೆ ಮಾಡಿಕೊಂಡಿದ್ದಾರಾ ಎಂಬುದನ್ನು ಪರಿಶೀಲಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪರಮೇಶ್ವರ ತಿಳಿಸಿದರು.

ಅಪಾರ್ಟ್‌ಮೆಂಟ್‌ನಲ್ಲಿ ಎಸ್‌ಟಿಪಿ ಅಳವಡಿಕೆಗೆ ಕಾನೂನು ತರಲು ರಾಜ್ಯ ಸರ್ಕಾರದ ಚಿಂತನೆ!

ನಗರದಲ್ಲಿ ನೀರಿನ ಸಮಸ್ಯೆ ನೀಗಿಸಲು ಕಾವೇರಿ ಐದನೇ ಹಂತದ ಯೋಜನೆ ಪ್ರಗತಿಯಲ್ಲಿದೆ. ಆದರೆ ಇದು ಸಾಲದು. ಹೀಗಾಗಿ ಲಿಂಗನಮಕ್ಕಿ ಯಿಂದ ನೀರು ತರಲು ಡಿಪಿಆರ್‌ ಮಾಡಲು ಸೂಚಿಸಿದ್ದೇನೆ.‌ ಇದಕ್ಕೂ ವಿರೋಧ ಕೇಳಿ ಬಂದಿದೆ. ಡಿಪಿಆರ್‌ ಬಳಿಕ ಸಾಧಕ ಬಾಧಕವನ್ನು ಪರಿಶೀಲಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಅವರು ಹೇಳಿದರು. 

ಸ್ಟೀಲ್‌ಬ್ರಿಡ್ಜ್‌ ಯೋಜನೆ ಈ ಹಿಂದೆಯೇ ಕೈಬಿಡಲಾಗಿದೆ. ಹೈಕೋರ್ಟ್‌ಗೂ ಈ ಸಂಬಂಧ ಮಾಹಿತಿ ನೀಡಿದ್ದೇವೆ. ಆದರೆ, ಇದೇ ಮಾರ್ಗವಾಗಿ ಎಲಿವೇಟೆಡ್‌ ಕಾರಿಡಾರ್ ಮಾಡಲು ಡಿಪಿಆರ್‌ ಸಿದ್ಧಪಡಿಸಲು ಸೂಚಿಸಿದ್ದೇವೆ. ಸ್ಟೀಲ್‌ ಬ್ರಿಡ್ಜ್‌ ಯೋಜನೆಯಲ್ಲಿ ಭ್ರಷ್ಟಾಚಾರ ಆಗಲಿದೆ ಎಂಬ ಕಾರಣಕ್ಕೆ ವಿರೋಧವಿತ್ತು. ಈ ಮಾರ್ಗಕ್ಕೆ ಪರ್ಯಾಯ ಯೋಜನೆಗೆ ವಿರೋಧವಿಲ್ಲ. ಹೀಗಾಗಿ ಎಸ್ಟೀಮ್‌ ಮಾಲ್‌ನಿಂದ ಚಾಲುಕ್ಯವರೆಗೆ ಎಲಿವೇಡೆಡ್‌ ಕಾರಿಡಾರ್‌ ನಿರ್ಮಿಸಲು ಡಿಪಿಆರ್‌ ಮಾಡಲಾಗುತ್ತಿದೆ. ಬಳಿಕ ಜನಾಭಿಪ್ರಾಯದ ಮೇರೆಗೆ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

Trending News