ಕೆ.ಆರ್. ಪೇಟೆ: ಕೆ.ಆರ್. ಪೇಟೆ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸುವ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿದ್ದು, ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ನಾರಾಯಣಗೌಡ ಕೆ.ಆರ್. ಪೇಟೆಯ ಮಿನಿ ವಿಧಾನಸೌಧದ ಬಳಿ ಬರುತ್ತಿದ್ದಂತೆ, ಬಾಂಬೆ ಕಳ್ಳ... ಬಾಂಬೆ ಕಳ್ಳ.... ಎಂದು ಘೋಷಣೆ ಕೂಗುತ್ತಾ ಅವರಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಿದ ಜೆಡಿಎಸ್ ಕಾರ್ಯಕರ್ತರು ಅವರ ಮೇಲೆ ಚಪ್ಪಲಿ ಎಸೆದು ತಮ್ಮ ಆಕ್ರೋಶ ಹೊರಹಾಕಿದರು.


ಇನ್ನು ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಕ್ಸಮರ ಏರ್ಪಟ್ಟು ಬಿಗುವಿನ ವಾತಾವರಣ ಮನೆಮಾಡಿತ್ತು. ಅಭ್ಯರ್ಥಿ ನಾರಾಯಣಗೌಡರ ರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿಸಲಾಯಿತು. ನಂತರ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳೇ ನಾರಾಯಣಗೌಡ ಅವರನ್ನು ತಮ್ಮ ಕಾರಿನಲ್ಲಿ ಸುರಕ್ಷಿತವಾಗಿ ಕರೆದೊಯ್ಯುವ ಮೂಲಕ ಪರಿಸ್ಥಿತಿಯನ್ನು ತಹಬದಿಗೆ ತಂದರು.