)
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಮಹೇಶ್ ನಾರಾಯಣ ಜಟ್ಟಿ ಸಜ್ಜುಗೊಂಡಿದ್ದಾರೆ. ಕಳೆದ 20 ದಿನಗಳಿಂದ ಚಾಮರಾಜನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ 1 ಬಾರಿ ಮುಷ್ಠಿ ಕಾಳಗದಲ್ಲಿ ಭಾಗವಹಿಸಿರುವ ಅನುಭವ ಇವರಿಗಿದೆ.
ಮಹೋತ್ಸವದಲ್ಲಿ ವಜ್ರಮುಷ್ಠಿ ಕಾಳಗಕ್ಕೆ ಅತ್ಯಂತ ಮಹತ್ವವಿದೆ. ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ದಂಡೇ ನೆರೆಯುತ್ತದೆ. ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಠಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡಲಾಗುತ್ತದೆ.
ಈ ವರ್ಷ ಯಾರನ್ನು ಕಳುಹಿಸುತ್ತೇವೆ ಎಂಬುದರ ಬಗ್ಗೆ ರಾಜಮನೆತನಕ್ಕೆ ಮೊದಲೇ ತಿಳಿಸುಲಾಗುತ್ತದೆ. ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿದವರಿಗೆ ತರಬೇತಿ ನೀಡಲು ಆರಂಭಿಸಲಾಗುತ್ತದೆ. ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ.
ವಜ್ರಮುಷ್ಠಿ ಕಾಳಗದಲ್ಲಿ ಭಾಗವಹಿಸುವುದೆಂದರೆ ಅದೊಂದು ಗೌರವ. ನಮ್ಮ ಜನಾಂಗಕ್ಕೆ ಮಾತ್ರ ಇದರಲ್ಲಿ ಭಾಗಿಯಾಗಲು ಅವಕಾಶ. ತಮ್ಮ ರಕ್ತ ದೇವಿಗೆ ಅರ್ಪಿಸಿದರೇ ನಾಡು ಹಾಗೂ ರಾಜರಿಗೆ ಒಳಿತು ಎಂಬ ನಂಬಿಕೆ ಇದೆ. ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವುದು ಮತ್ತು ರೋಮಾಂಚಕಾರಿಯಾದ ಈ ಸಮರ ಕಲೆಯನ್ನು ಉಳಿಸುವುದಕ್ಕಾಗಿ ಸಂತೋಷದಿಂದಲೇ ಪಾಲ್ಗೊಳ್ಳುತ್ತೇವೆ" ಎನ್ನುತ್ತಾರೆ ಈ ಬಾರಿ ಕಾಳಗಕ್ಕೆ ಅಣಿಯಾಗಿರುವ ಮಹೇಶ್ ಜಟ್ಟಿ.
ಒಟ್ಟಿನಲ್ಲಿ ಶತಮಾನಗಳಿಂದ ಇರುವ ಸಮರ ಕಲೆಯನ್ನು ನಾಡಹಬ್ಬದ ದಿನದಂದು ಪ್ರದರ್ಶಿಸಿ ದೇವರು ಮತ್ತು ರಾಜರಿಗೆ ರಕ್ತ ಹರಿಸುವ ಇವರ ಧೈರ್ಯ, ಸಾಹಸ ನಿಜಕ್ಕೂ ರೋಮಾಂಚಕಾರಿಯಾಗಿದೆ.