ಬೆಂಗಳೂರು: ಖಾಕಿ ಧರಿಸಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿರುವ ದೇವರಾಜ್ ಅರಸು ಪ್ರತಿಮೆ ಮುಂಭಾಗದಲ್ಲಿ ಔರಾದ್ಕರ್ ಸಮಿತಿ ವರದಿ ಜಾರಿಮಾಡುವಂತೆ ಒತ್ತಾಯಿಸಿ ಪೊಲೀಸ್ ಸಮವಸ್ತ್ರ ಧರಿಸಿ ಪ್ರತಿಭಟನೆ ಮಾಡುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.


"ರಾಜ್ಯದಲ್ಲಿ ಪೊಲೀಸರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿಲ್ಲ, ರಜೆ ಸಿಗುವುದು ಕನಸಿನ ಮಾತಾಗಿದ್ದು, ನರಕ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಔರಾದ್ಕರ್ ವರದಿ ಜಾರಿಗೊಳಿಸಬೇಕು" ಎಂದು ಘೋಷಣೆಗಳನ್ನು ಕೂಗುತ್ತಾ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.


ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೊಲೀಸ್ ಸಿಬ್ಬಂದಿಯ ವೇತನ, ಭತ್ಯೆ ಮತ್ತು ಸೌಲಭ್ಯಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಕಲೆಹಾಕಿ ಎಡಿಜಿಪಿ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ರಾಜ್ಯ ಪೋಲೀಸರ ಶೇ. 20 ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಆದರೆ, ಇದುವರೆಗೂ ಔರಾದ್ಕರ್ ಸಮಿತಿ ಶಿಫಾರಸ್ಸನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಲಾಗುತ್ತಿದೆಯಾದರೂ ಕಾರ್ಯರೂಪಕ್ಕೆ ಬಂದಿಲ್ಲ.