ವಿದ್ಯಾಸಿರಿ ಸ್ಕಾಲರ್‌ಶಿಪ್‌ಗೆ ಕನ್ನ: ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಲ್ಲಿ ಶಿಕ್ಷಣವನ್ನು ಪ್ರೊತ್ಸಾಹಿಸಲು ಜಾರಿಗೆ ತಂದಿರುವ ವಿದ್ಯಾಸಿರಿ ಯೋಜನೆಗೆ ಅವಶ್ಯಕ ಹಣವನ್ನು ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಂಜೂರು ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.  

Written by - Zee Kannada News Desk | Last Updated : Jun 17, 2022, 06:41 PM IST
  • ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿ ಜನಪರ ಯೋಜನೆಗಳಿಗೆ ಹಣ ನೀಡದೆ ನಿರ್ಲಕ್ಷಿಸುತ್ತಿರುವ ಬಿಜೆಪಿ ಸರ್ಕಾರ
  • ನನ್ನ ಸ್ವಂತ ಅನುಭವದ ಆಧಾರದಲ್ಲಿ ರೂಪಿಸಿದ್ದ ವಿದ್ಯಾಸಿರಿ ಯೋಜನೆಗೆ ರಾಜ್ಯ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ
  • ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಹಾಸಿಗೆ-ಹೊದಿಕೆ-ಸೋಪ್‍ಗಳನ್ನೂ ಕೊಡದ ಬಿಜೆಪಿ ಸರ್ಕಾರ
ವಿದ್ಯಾಸಿರಿ ಸ್ಕಾಲರ್‌ಶಿಪ್‌ಗೆ ಕನ್ನ: ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಹಾವೇರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಸಿರಿ ಸ್ಕಾಲರ್‌ಶಿಪ್‌ಗೆ ಕನ್ನ ಹಾಕಿದ ಪ್ರಕರಣದಲ್ಲಿ ಅಚ್ಚರಿ ಪಡುವಂತಹದೇನಿಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ಸ್ಪೂರ್ತಿ ಪಡೆದಿರುವ ಸರ್ಕಾರಿ ನೌಕರರು ನೇರವಾಗಿ ವಿದ್ಯಾರ್ಥಿಗಳು, ಮಹಿಳೆಯರು, ರೈತರು ಹೀಗೆ ಎಲ್ಲರ ಸುಲಿಗೆಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಒಂದೆಡೆ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿದಂತೆ ನಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಗೆ ಹಣ ನೀಡದೆ ನಿರ್ಲಕ್ಷಿಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಒಂದಿಷ್ಟು ಮಂಜೂರಾಗಿರುವ ಹಣವನ್ನು ಕೂಡ ಬಿಡದೆ ಲೂಟಿ ಮಾಡುತ್ತಿದೆ’ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ: 'ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?'

ಹಾಸ್ಟೆಲ್‍ನಲ್ಲಿ ಪ್ರವೇಶ ಸಿಗದೆ ಇದ್ದ ವಿದ್ಯಾರ್ಥಿಗಳು ಕೊಠಡಿ ಬಾಡಿಗೆಗೆ ಪಡೆದು ಅಡುಗೆ ಮಾಡಿಕೊಂಡು ವ್ಯಾಸಂಗ ಮಾಡಲು ನೆರವಾಗುವಂತೆ ತಿಂಗಳಿಗೆ 1,500 ರೂ. ನೀಡುವ ಯೋಜನೆ ವಿದ್ಯಾಸಿರಿ. ನನ್ನ ಸ್ವಂತ ಅನುಭವದ ಆಧಾರದಲ್ಲಿ ರೂಪಿಸಿದ್ದ ಈ ಯೋಜನೆಗೆ ರಾಜ್ಯ ಬಿಜೆಪಿ ಸರ್ಕಾರ ಕಲ್ಲು ಹಾಕುತ್ತಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘2017-18ರ ಸಾಲಿನಲ್ಲಿ ವಿದ್ಯಾಸಿರಿ ಯೋಜನೆಗೆ 88,549 ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ 2 ವರ್ಷಗಳ ಅವಧಿಯಲ್ಲಿ ಸರ್ಕಾರ ಈ ಯೋಜನೆಗೆ ಹಣ ನೀಡದೆ ಹಾಸ್ಟೆಲ್ ಸೌಲಭ್ಯ ಇಲ್ಲದ ಹಿಂದುಳಿದ ಜಾತಿಯ ವಿದ್ಯಾರ್ಥಿಗಳನ್ನು ಬೀದಿಗೆ ತಳ್ಳುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಹುಲ್ ವಿರುದ್ಧ ಬಿಜೆಪಿ ಕಿಡಿ

‘ವಿದ್ಯಾಸಿರಿ ಯೋಜನೆಯೊಂದೇ ಅಲ್ಲ, ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಹಾಸಿಗೆ-ಹೊದಿಕೆ-ಸೋಪ್‍ಗಳನ್ನೂ ಕೊಟ್ಟಿಲ್ಲ. ವಿದ್ಯಾರ್ಥಿ ವೇತನವನ್ನೂ ಬಾಕಿ ಇಟ್ಟುಕೊಳ್ಳಲಾಗಿದೆ. ಹಾಸ್ಟೆಲ್ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡಿಲ್ಲ. ಇವೆಲ್ಲವೂ ವಿದ್ಯಾರ್ಥಿಗಳ ವ್ಯಾಸಂಗದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಲ್ಲಿ ಶಿಕ್ಷಣವನ್ನು ಪ್ರೊತ್ಸಾಹಿಸಲು ಜಾರಿಗೆ ತಂದಿರುವ ವಿದ್ಯಾಸಿರಿ ಯೋಜನೆಗೆ ಅವಶ್ಯಕ ಹಣವನ್ನು ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಂಜೂರು ಮಾಡಬೇಕು. ಈಗಾಗಲೇ ಮಂಜೂರಾಗಿರುವ ಹಣವನ್ನು ಸುಲಿಗೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News