ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ: ಸಿದ್ದರಾಮಯ್ಯ

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Aug 11, 2023, 06:14 PM IST
  • ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ
  • ಜನರಿಗೆ ನೀಡಿದ್ದ ವಚನ ಪಾಲನೆಗಾಗಿ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ
  • ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ಸರ್ಕಾರ ಬಿಡಲ್ಲ
ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ: ಸಿದ್ದರಾಮಯ್ಯ  title=
ಬಿಜೆಪಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್ ವಿಚಾರವಾಗಿ ಟೀಕಿಸಿರುವ ಬಿಜೆಪಿಗೆ ಸರಣಿ ಟ್ವೀಟ್ ಮೂಲಕ ಅವರು ತಿರುಗೇಟು ನೀಡಿದ್ದಾರೆ.

‘ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇವರೇ ವಿರೋಧ ಪಕ್ಷದ ನಾಯಕರಾಗ್ತಾರಂತೆ; ಯಶ್ವಂತ ಗುರೂಜಿಯ ಸ್ಫೋಟಕ ಭವಿಷ್ಯ!

‘ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್.ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15%ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ’ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

‘ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿಯವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ’ವೆಂದು ಟೀಕಿಸಿದ್ದಾರೆ.

‘ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, POW ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ಅಂಗನವಾಡಿಗಳಲ್ಲಿ ಪಾಮೊಲಿನ್‌ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸರ್ಕಾರ ನಿರ್ಧಾರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News