ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಆತ ಈ ಹಿಂದೆ ತಂಗಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದ ಎಸ್ಐಟಿ ಸ್ಥಳ ಮಹಜರು ಕಾರ್ಯ ನಡೆಸಿತು.

ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ಕಂಡು ಬಂದಿದೆ. ದೂರುದಾರನನ್ನು ನೇರವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಕರೆದುಕೊಂಡು ಹೋಗಿ ಶೋಧ ಕಾರ್ಯ ನಡೆಸಲಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಆತ ಈ ಹಿಂದೆ ತಂಗಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದ ಎಸ್ಐಟಿ ಸ್ಥಳ ಮಹಜರು ಕಾರ್ಯ ನಡೆಸಿತು. ಇದೇ ವೇಳೆ ತಿಮರೋಡಿ ಮನೆಯಲ್ಲಿದ್ದ ದೂರುದಾರನಿಗೆ ಸಂಬಂಧಿಸಿದ ವಸ್ತುಗಳೆಲ್ಲವನ್ನೂ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ ಬಳಸುತ್ತಿದ್ದ ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ಎಸ್ಐಟಿ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಸಾಕ್ಷಿ ದೂರುದಾರ ಕಳೆದ ಕೆಲವು ತಿಂಗಳುಗಳಿಂದ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಯಲ್ಲಿಯೇ ವಾಸ್ತವ್ಯವಿದ್ದ ಎನ್ನಲಾಗಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ ದಿನದಿಂದಲೇ ಸಾಕ್ಷಿ ದೂರುದಾರ ಮಹೇಶ್ ಶೆಟ್ಟಿಯ ಮನೆಯಿಂದಲೇ ಪ್ರತಿದಿನ ಎಸ್ಐಟಿ ಕಚೇರಿಗೆ ಬಂದು ಹೋಗುತ್ತಿದ್ದ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೂ ಮಾಹಿತಿಯಿತ್ತು.
ಸದ್ಯ ಸಾಕ್ಷಿ ದೂರುದಾರನ ಬಂಧನವಾಗಿರುವುದರಿಂದ ಆತ ಉಪಯೋಗಿಸುತ್ತಿದ್ದ ಮೊಬೈಲ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ ಆತ ವಾಸಿಸುತ್ತಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿ ಮಹಜರು ಮಾಡಬೇಕಾಗಿದ್ದು, ಅದರಂತೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸರ ಸಹಕಾರದಲ್ಲಿ ಸರ್ಚ್ ವಾರೆಂಟ್ ನೊಂದಿಗೆ ಮಹೇಶ್ ಶೆಟ್ಟಿ ತಿಮರೋಡಿಯ ಮನೆಗೆ ಇಂದು ಬೆಳಗ್ಗೆ ತೆರಳಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : ಎಸ್ಸಿ ಒಳ ಮೀಸಲಾತಿ ಜಾರಿಗೆ ಸರ್ಕಾರ ಆದೇಶ
ದೂರುದಾರ ವಾಸವಿದ್ದ ಕೊಠಡಿಯಿಂದ ಆತ ಬಳಸುತ್ತಿದ್ದ ಮೊಬೈಲ್ ಫೋನ್ ಹಾಗೂ ಆತನ ಬಟ್ಟೆಗಳನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಮನೆಯ ಪರಿಶೀಲನೆಗೆ ಎಸ್ಐಟಿ ತೆರಳಿದ್ದ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರ ಮುಖಂಡರು ಮನೆಯಲ್ಲಿ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಅತ್ತ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಸುಜಾತಾ ಭಟ್ ವಿಚಾರಣೆಗಾಗಿ ಇಂದು ಮುಂಜಾನೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾದರು.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬೆಳ್ತಂಗಡಿಗೆ ಆಗಮಿಸಿದ ಸುಜಾತ ಭಟ್ ನೇರವಾಗಿ ಎಸ್ಐಟಿ ಕಚೇರಿಗೆ ತೆರಳಿದರು. ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಅನನ್ಯಾ ಭಟ್ ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಗಿ ಸುಜಾತಾ ಭಟ್ ಜುಲೈ 15 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು, ಪ್ರಕರಣವನ್ನು ಎಸ್ಐಟಿಗೆ ವರ್ಗಾಯಿಸಿದ್ದರು.
ಒಟ್ಟಿನಲ್ಲಿ ಧರ್ಮಸ್ಥಳ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.