ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾಗದೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಜೆಪಿ ಹೈಕಮ್ಯಾಂಡ್ ಸೂಚನೆ ನೀಡಿದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇಂದೇ ಪ್ರಮಾಣವಚನ ಸಮಾರಂಭಕ್ಕೆ ಸಮಯ ನಿಗದಿ ಮಾಡುವಂತೆ ಮನವಿ ಮಾಡಿದ್ದರು. ಅದರಂತೆ ರಾಜ್ಯಪಾಲರು ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು.
ಮತ್ತೊಂದೆಡೆ, ಈಗಾಗಲೇ ಅತೃಪ್ತ ಶಾಸಕರ ರಾಜೀನಾಮೆ ವಿಚಾರಣೆ ಸ್ಪೀಕರ್ ಅಂಗಳದಲ್ಲಿದ್ದು, ಈಗಾಗಲೇ ಮೂವರು ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ತೀರ್ಪು ನೀಡಿದ್ದಾರೆ. ಉಳಿದ ಶಾಸಕರ ರಾಜೀನಾಮೆ ವಿಚಾರವಾಗಿ ಶೀಘ್ರದಲ್ಲಿಯೇ ಆದೇಶ ನೀಡುವುದಾಗಿ ಸ್ಪೀಕರ್ ತಿಳಿಸಿದ್ದಾರೆ. ಅಲ್ಲದೆ, ಹಣಕಾಸು ಮಸೂದೆ ಜಾರಿಯಾಗದ ಹಿನ್ನೆಲೆಯಲ್ಲಿ ಸಂವಿಧಾನ ಬಿಕ್ಕಟ್ಟು ಎದುರಾಗಲಿದ್ದು, ಸರ್ಕಾರಿ ನೌಕರರಿಗೆ ವೇತನ ಸಿಗುವುದೂ ಕಷ್ಟ ಎನ್ನಲಾಗಿದೆ.ಇಷ್ಟೆಲ್ಲಾ ಬೆಳವಣಿಗೆಗಳ ನಡುವೆಯೂ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆಯೇರಿದೆ. ಇಂದು ಬೆಳಿಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕ್ಷಣದಿಂದ ಪ್ರಮಾಣವಚನ ಸ್ವೀಕಾರ ಮಾಡುವವರೆಗೂ ನಡೆದ ಬೆಳವಣಿಗೆಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ...