ಅಪೂರ್ಣ ರಾಮಮಂದಿರ ಉದ್ಘಾಟನೆ: ಮೋದಿಗೆ ಸಾಧನೆ ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸವಿಲ್ಲ-ಸಿದ್ದರಾಮಯ್ಯ

ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲವೆಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Written by - Puttaraj K Alur | Last Updated : Jan 11, 2024, 05:38 PM IST
  • ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ
  • ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಬಿಜೆಪಿ ಮತ್ತು RSS ನಾಯಕರು ಪ್ರತಿನಿತ್ಯ ಉಪದೇಶ ನೀಡುತ್ತಾರೆ
  • ಪ್ರಧಾನಿ ಮೋದಿ ನಡೆ ಬಗ್ಗೆ ಇವರು ಮೌನವಾಗಿರುವುದು ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ
ಅಪೂರ್ಣ ರಾಮಮಂದಿರ ಉದ್ಘಾಟನೆ: ಮೋದಿಗೆ ಸಾಧನೆ ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸವಿಲ್ಲ-ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿಪಕ್ಷ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ-ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ಧಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು RSS ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ಮೋದಿಯವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ. ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ‘ಟಿಕೆಟ್ ಕೊಡಿ ಅಜ್ಜಿ’ ಎಂದಿದ್ದಕ್ಕೆ ವಿದ್ಯಾರ್ಥಿನಿಗೆ ಮೇಲೆ ಮಹಿಳಾ ಕಂಡಕ್ಟರ್ ಹಲ್ಲೆ!

‘ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ದೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ" ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು RSS, ವಿಶ್ವಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ. ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲವೆಂಬ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ. ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ’ವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಇನ್ನೇನು 10 ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿರುವ ಪ್ರಧಾನಿ ಮೋದಿಯವರಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಲೋಕಸಭಾ ಚುನಾವಣೆಯ ಕಾಲದಲ್ಲಿಯೇ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಉದ್ಘಾಟಿಸಿ ಈ ಮೂಲಕ ಹಿಂದುತ್ವದ ಅಲೆಯನ್ನು ಬಡಿದೆಬ್ಬಿಸಿ ಅದರ ಮರೆಯಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಕಳೆದ 30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನತೆ ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲವೆಂಬ ವಿಶ್ವಾಸ ನನಗಿದೆ. ಈಗಾಗಲೇ ಜನ ಇಟ್ಟಿಗೆಯ ಹೆಸರಲ್ಲಿ ಸಂಗ್ರಹಿಸಿರುವ ದೇಣಿಗೆಯ ಲೆಕ್ಕವನ್ನು ಕೇಳತೊಡಗಿದ್ದಾರೆ ಎಂದು ಸಿಎಂ ಕುಟುಕಿದ್ದಾರೆ.

ನಾವು ಹಿಂದೂ ಧರ್ಮದ ವಿರೋಧಿಗಳಲ್ಲ, ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪ್ರಶ್ಯತೆ, ಜಾತೀಯತೆ, ಅಂಧಶ್ರದ್ದೆ, ಕಂದಾಚಾರಗಳನ್ನು ವಿರೋಧಿಸುತ್ತೇವೆ. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ನಮ್ಮ ಸಂಪೂರ್ಣ ವಿರೋಧವಿದೆ. ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರು, ಕುವೆಂಪು ಸೇರಿದಂತೆ ದೇಶದ ಅನೇಕಾನೇಕ ಮಹನೀಯರು ಆಚರಿಸುತ್ತಾ ಬಂದಿರುವ ಹಿಂದೂ ಧರ್ಮದ ಬಗ್ಗೆ ನಮಗೆ ಯಾವುದೇ ತಕರಾರಿಲ್ಲ. ಆದರೆ ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದ ಡೋಂಗಿ ಹಿಂದುತ್ವವನ್ನು ನಾವು ವಿರೋಧಿಸುತ್ತಲೇ ಇರುತ್ತೇವೆ. ಈ ವಿಷಯದಲ್ಲಿ ನಾವು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಮಾಡುವುದಿಲ್ಲವೆಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಜನಪ್ರತಿನಿಧಿಯಾಗಿ ಇಲ್ಲಿವರೆಗೆ ನೂರಾರು ದೇವಸ್ಥಾನಗಳ ಪ್ರತಿಷ್ಠಾಪನೆ, ಜೀರ್ಣೋದ್ದಾರದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಊರಿನಲ್ಲಿಯೇ ರಾಮನ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇನೆ. ಇದೇ ರೀತಿ ಮಸೀದಿ-ಚರ್ಚ್ ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದ್ದೇನೆ. ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಲೇ ಬೇಕಾಗಿದೆ. ಶ್ರೀರಾಮನ ಮೇಲೆ ನಂಬಿಕೆ ಮತ್ತು ಭಕ್ತಿ ಇದ್ದವರು ಪ್ರತಿದಿನ ಆತನನ್ನು ಪೂಜಿಸುವುದು ಹೇಗೆ ಧಾರ್ಮಿಕ ಕರ್ತವ್ಯವೋ, ಅದೇ ರೀತಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಸುವವರ ವಿರುದ್ಧ ದನಿ ಎತ್ತುವುದು ಕೂಡ ಅಷ್ಟೇ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದೆ. ಯಾವ ಧರ್ಮ ಕೂಡ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ನಾನು ಮತ್ತು ನಮ್ಮ ಪಕ್ಷ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.   

ಇದನ್ನೂ ಓದಿ: ಕಾಮನ್ ಮ್ಯಾನ್‌ಗೆ ಮಾತ್ರವಲ್ಲ ಸಿಎಂಗೂ ತಟ್ಟಿದ ಟ್ರಾಫಿಕ್ ಬಿಸಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News