ಪ್ರತಿ ಗ್ರಾಮಗಳಲ್ಲೂ ಸಮೀಕ್ಷೆ ಮಾಡಿ ರೈತರಿಗೆ 3 ದಿನದಲ್ಲಿ ಪರಿಹಾರ ನೀಡುವಂತೆ ಮಾಜಿ ಸಿಎಂ ಮನವಿ

ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ  ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಳವಳ

Last Updated : Apr 11, 2020, 03:23 PM IST
ಪ್ರತಿ ಗ್ರಾಮಗಳಲ್ಲೂ ಸಮೀಕ್ಷೆ ಮಾಡಿ ರೈತರಿಗೆ 3 ದಿನದಲ್ಲಿ ಪರಿಹಾರ ನೀಡುವಂತೆ ಮಾಜಿ ಸಿಎಂ ಮನವಿ  title=
File Image

ಬೆಂಗಳೂರು:  ಲಾಕ್‌ಡೌನ್ ಮೂರನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ  ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು 'ಹೆತ್ತ ಮಕ್ಕಳು' ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲೂ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನೂ ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ  ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು' ಎಂದಿದ್ದಾರೆ.

ಕುಮಾರಸ್ವಾಮಿ ಅವರಿಂದ ಸೋಂಕು ನಿವಾರಕ ಟನಲ್‌ಗಳ ಸ್ಥಾಪನೆ

ಇನ್ನೊಂದು ಟ್ವೀಟ್ ನಲ್ಲಿ 'ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ  ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಸರ್ಕಾರ 'ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ' ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ  ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬುದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ ಎಂದಿದ್ದಾರೆ.

ಇದಲ್ಲದೆ 'ಕೈಗೆ ಬಂದ ಬೆಳೆಯು ಮಾರಾಟವಾಗದೆ ಮುಂದೇನು? ಎಂದು ಚಿಂತಾಕ್ರಾಂತರಾಗಿರುವ  ರೈತರಿಗೆ ಸಹಾಯ ಹಸ್ತಚಾಚಲು ಆಮೆವೇಗದಲ್ಲಿರುವ ಸರ್ಕಾರ ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆ ಉಂಟಾಗದಂತೆ ಎಚ್ಚರ ವಹಿಸುತ್ತಿರುವುದಾಗಿ  ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ' ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಡ್ಯ, ತುಮಕೂರು ಜಿಲ್ಲೆಯ ಶಾಸಕರೊಂದಿಗೆ ಎಚ್‌ಡಿಕೆ ವಿಡಿಯೋ ಕಾನ್ಫರೆನ್ಸ್

ಮಗದೊಂದು ಟ್ವೀಟ್ ನಲ್ಲಿ‌ 'ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ  ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸುತ್ತೇನೆ' ಎಂದಿದ್ದಾರೆ.

Trending News