ನುಗ್ಗೆಕೇರಿಯಲ್ಲಿ ಮುಸ್ಲಿಂ ವ್ಯಾಪಾರಿಗಳ ತಳ್ಳುಗಾಡಿ ಧ್ವಂಸ: ಎಚ್‌ಡಿಕೆ ಆಕ್ರೋಶ

ಕಾಶ್ಮೀರದಲ್ಲಿ ರಕ್ತದೋಕುಳಿ ಹರಿಸುವ ಭಯೋತ್ಪಾದಕರಿಗೂ, ಶಾಂತಿ-ಸೌಹಾರ್ದತೆಗೆ ಕಿಚ್ಚಿಡುತ್ತಿರುವ ಈ ಕಿರಾತಕರಿಗೂ ವ್ಯತ್ಯಾಸವೇ ಇಲ್ಲವೆಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Apr 9, 2022, 11:12 PM IST
  • ಧಾರವಾಡದ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಧ್ವಂಸ
  • ರಾಮಭಕ್ತರ ಸೋಗಿನಲ್ಲಿ ಬಂದು ದುಷ್ಕರ್ಮಿಗಳು ಮುಸ್ಲಿಂರ ಅಂಗಡಿ ನಾಶಪಡಿಸಿದ್ದಾರೆ
  • ಮಾರಾಟಕ್ಕಿಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳುಮಾಡಿರುವುದು ಹೇಯ ಮತ್ತು ಪರಮ ಕಿರಾತಕ ಕೃತ್ಯ
ನುಗ್ಗೆಕೇರಿಯಲ್ಲಿ ಮುಸ್ಲಿಂ ವ್ಯಾಪಾರಿಗಳ ತಳ್ಳುಗಾಡಿ ಧ್ವಂಸ: ಎಚ್‌ಡಿಕೆ ಆಕ್ರೋಶ title=
ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗೇಕೇರಿಯಲ್ಲಿ ಮುಸ್ಲಿಂ ವ್ಯಾಪ್ಯಾರಿಗಳ ತಳ್ಳುಗಾಡಿ ಧ್ವಂಸ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ರಾಮಭಕ್ತರ ಸೋಗಿನಲ್ಲಿ ಬಂದು ಕೃತ್ಯವೆಸಗಿದ್ದಾರೆ ಅಂತಾ ಕಿಡಿಕಾರಿದ್ದಾರೆ.  

‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮು‌ಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ’ ಅಂತಾ ಹೇಳಿದ್ದಾರೆ.

‘ಕಾಶ್ಮೀರದಲ್ಲಿ ರಕ್ತದೋಕುಳಿ ಹರಿಸುವ ಭಯೋತ್ಪಾದಕರಿಗೂ, ಶಾಂತಿ-ಸೌಹಾರ್ದತೆಗೆ ಕಿಚ್ಚಿಡುತ್ತಿರುವ ಈ ಕಿರಾತಕರಿಗೂ ವ್ಯತ್ಯಾಸವೇ ಇಲ್ಲ. ತಿನ್ನುವ ಅನ್ನಕ್ಕೆ ಮಣ್ಣುಹಾಕಿ ಬದುಕಿಗೆ ಬೆಂಕಿ ಇಡುವ ಇಂತಹ ಪ್ರವೃತ್ತಿ ಅನಾಗರಿಕ-ಅಸಹ್ಯ. ಕರ್ನಾಟಕವನ್ನುಈ ದುಷ್ಟರು, ಶಿಲಾಯುಗದತ್ತ ಹಿಮ್ಮೆಟ್ಟಿಸುತ್ತಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ’ವೆಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅತೀಹೆಚ್ಚು ಸುಳ್ಳು ಹೇಳಿದ ಬಿಜೆಪಿ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ: ಸಿದ್ದರಾಮಯ್ಯ

‘ಈ ರಕ್ಕಸರು ಕಲ್ಲಂಗಡಿಯನ್ನು ರಸ್ತೆಗೆಸೆದು ನಾಶ ಮಾಡಿದ ಪರಿಯನ್ನು ಗಮಿನಿಸಿದರೆ ಸಾಕು; ಇವರ ರಾಕ್ಷಸ ಪ್ರವೃತ್ತಿ ಉಗ್ರರಿಗಿಂತ ಕಮ್ಮಿಯೇನಲ್ಲ. ಅನ್ನವನ್ನೇ ಹಾಳುಗೆಡವಿದ ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು. ಇವರ ವಿರುದ್ಧ ಸರ್ಕಾರವು ಕೂಡಲೇ ಭಯೋತ್ಪಾದನೆ ವಿರುದ್ಧದ ಕಾಯ್ದೆ ಅಡಿ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಸರ್ವ ಜನಾಂಗದ ತೋಟಕ್ಕೆ ಸಮಾಧಿ ಕಟ್ಟುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆಯಾ? ಎಂಬ ಸಂಶಯ ನನ್ನದು. ‘ಮೌನಂ ಸಮ್ಮತಿ ಲಕ್ಷಣಂʼ ಎನ್ನುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಬಾಯಿಗೆ ಬೀಗ ಹಾಕಿಕೊಂಡು; ‘ಸತ್ತ ಸರ್ಕಾರಕ್ಕೆ ನಾನೇ ಸಾಹುಕಾರʼ ಎನ್ನುವಂತೆ ಬೆಂಕಿ ನಡುವೆ ಪಿಟೀಲು ಬಾರಿಸುತ್ತಿದ್ದ ನೀರೋ ದೊರೆಯನ್ನು ಮೀರಿಸುತ್ತಿದ್ದಾರೆ’ ಅಂತಾ ಕುಮಾರಸ್ವಾಮಿ ಗುಡುಗಿದ್ದಾರೆ.

‘ಅನ್ನಕ್ಕೆ ಮಣ್ಣು ಹಾಕುವುದು ಯಾವ ಧರ್ಮ?, ಬದುಕಿಗೆ ಬೆಂಕಿ ಇಡುವುದು ಯಾವ ಧರ್ಮ?, ಮನುಷ್ಯತ್ವಕ್ಕೆ ಸಮಾಧಿ ಕಟ್ಟುವುದು ಯಾವ ಧರ್ಮ?, ಮಾನವೀಯತೆಯ ಸಾಕಾರಮೂರ್ತಿ ಶ್ರೀರಾಮಚಂದ್ರನಿಂದ ಇವರು ಕಲಿತದ್ದು ಯಾವ ಧರ್ಮ? ಹಾಗೂ ಸೇವೆಯನ್ನೇ ಧರ್ಮವೆಂದು ನಂಬಿದ ಶ್ರೀ ಆಂಜನೇಯನಿಂದ ಇವರು ಕಲಿತ ಆದರ್ಶ ಧರ್ಮ ಇದೇನಾ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸೈಮನ್ ರಾಜ್‌ಗೆ ಹಣ ಕೊಟ್ಟು ಸುಳ್ಳು ಹೇಳಿಸಿದ್ದಾರೆ: ಜಮೀರ್ ಅಹ್ಮದ್ ಆರೋಪ

‘ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು. ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರ್ಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು. ಇದು ನನ್ನ ಆಗ್ರಹ’ವೆಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News